Vijaya Sankalpa Yatra: ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ, ಕೇಸರಿ ರಥಕ್ಕೆ ನಡ್ಡಾ ಚಾಲನೆ

Mar 1, 2023

 
 

ಇಂದಿನಿಂದ (ಮಾರ್ಚ್​.1) ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಜೆ.ಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಆರಂಭವಾಗುವ ಯಾತ್ರೆಗೆ ಚಾಲನೆ ನೀಡಲಿದ್ದಾರೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election) ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆ ರಾಜ್ಯದ ಪ್ರಮುಖ ಮೂರು ಪಕ್ಷಗಳು ಚುನಾವಣೆಗೆ ಸಾಕಷ್ಟು ಸಿದ್ದತೆ ನಡೆಸಿವೆ. ಭಾರತೀಯ ಜನತಾ ಪಾರ್ಟಿ (BJP) ಜೋರಾಗಿಯೇ ಪ್ರಚಾರದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ದಕ್ಷಿಣ ಭಾರತದಲ್ಲೇ (South India) ಅತಿ ದೊಡ್ಡ ರಾಜ್ಯವಾದ ಕರ್ನಾಟಕದಲ್ಲಿ (Karnataka) ಮತ್ತೆ ಕಮಲ ಅರಳಿಸಲು ಟೊಂಕ ಕಟ್ಟಿ ನಿಂತಿದೆ. ಈ ಹಿನ್ನೆಲೆ ಪಕ್ಷದ ರಾಜ್ಯ ನಾಯಕರು, ಕೇಂದ್ರ ನಾಯಕರನ್ನು ರಾಜ್ಯಕ್ಕೆ ಕರೆಸಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಅದರಂತೆ ಈಗಾಗಲೇ ಚುನಾವಣಾ ಚಾಣಕ್ಯ ಅಮಿತ್​ ಶಾ (Amit Shah), ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ಜಡ್ಡಾ (JP Nadda) ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇಂದಿನಿಂದ (ಮಾರ್ಚ್​.1) ಬಿಜೆಪಿ ವಿಜಯ ಸಂಕಲ್ಪ ಯಾತ್ರೆ (Vijaya Sankalp Rath Yatra) ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಮರಾಜನಗರದ (Chamrajnagar) ಮಲೆಮಹದೇಶ್ವರ ಬೆಟ್ಟದಿಂದ (Malemahadeshwar Betta) ಆರಂಭವಾಗುವ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಜೆ.ಪಿ ನಡ್ಡಾ ರಾಜ್ಯ ಪ್ರವಾಸ ವೇಳಾಪಟ್ಟಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಇಂದು ಬೆಳಗ್ಗೆ 11ಕ್ಕೆ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಳಿಕ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಾರೆ. ಮಲೆಮಹದೇಶ್ವರ ದೇವಾಲಯದಲ್ಲಿ ನಡ್ಡಾಗೆ ಪೂರ್ಣಕುಂಭ ದ ಮೂಲಕ ಸ್ವಾಗತ ಮಾಡಿಕೊಳ್ಳಲಾಗುತ್ತದೆ. ಬಳಿಕ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ.

ನಂತರ ಬೆಳಗ್ಗೆ 11.50ಕ್ಕೆ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡುತ್ತಾರೆ. ಮಧ್ಯಾಹ್ನ 12.05ಕ್ಕೆ ಸೋಲಿಗ ಸಮುದಾಯದ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12.50ಕ್ಕೆ ಸಾಲೂರು ಮಠಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 2 ಗಂಟೆಗೆ ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ‌ಮಂಟಪ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಸಂಜೆ 4.25ಕ್ಕೆ ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ.

ಜೆಪಿ ನಡ್ಡಾ ಮಲೆಮಹದೇಶ್ವರ ಬೆಟ್ಟದಲ್ಲಿ ರಥಯಾತ್ರೆಗೆ ಚಾಲನೆ ನೀಡಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವರಾದ ಶೋಭಾ ಕರಾಂದ್ಲಾಜೆ, ಎ. ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಹಲವು ಸಚಿವರು, ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ರಥಯಾತ್ರೆ

ಚಾಮರಾಜನಗರ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಥಯಾತ್ರೆ, ರೋಡ್ ಶೋ ನಡೆಯಲಿದೆ.  ಹನೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಕೊಳ್ಳೇಗಾಲದಲ್ಲಿ ರೋಡ್ ಶೋ ಹಾಗೂ ಸಮಾವೇಶ ನಡೆಯುತ್ತದೆ. ನಾಳೆ (ಮಾ.2) ಚಾಮರಾಜನಗರದಲ್ಲಿ ರೋಡ್ ಶೋ ನಡೆಯಲಿದೆ. ಗುಂಡ್ಲುಪೇಟೆಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.

ವಿಜಯ ಸಂಕಲ್ಪ ರಥ ಯಾತ್ರೆ ವೈಶಿಷ್ಟ್ಯ

ರಾಜ್ಯ ಮತ್ತು ಕೇಂದ್ರ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ದೃಷ್ಟಿಯಿಂದ ಬಿಜೆಪಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪ ರಥ ಯಾತ್ರೆ ಮಾಡಲಿದೆ. ಮಾರ್ಚ್ 1 ರಿಂದ ಪ್ರಾರಂಭವಾಗುವ ಯಾತ್ರೆ ನಾಲ್ಕು ಕೋಟಿ ಜನರನ್ನು ತಲುಪಲು ನಾಲ್ಕು ದಿಕ್ಕುಗಳಿಂದ ಪ್ರಾರಂಭಿಸಲು ಪಕ್ಷ ಸಿದ್ದವಾಗಿದೆ. 224 ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು, ಉಸ್ತುವಾರಿಗಳಿಗೆ ಕ್ಷೇತ್ರವಾರು ರಾಜಕೀಯ ಚಿತ್ರಣ, ಎಲೆಕ್ಷನ್‌ ಟ್ರೆಂಡ್, ವಿಪಕ್ಷಗಳ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ಒಪ್ಪಿಸುವ ಜವಾಬ್ದಾರಿ ನೀಡಲಾಗಿದೆ.

4 ಭಾಗಗಳಿಂದ ರಥಯಾತ್ರೆ

ಬೆಂಗಳೂರಿನ ಕೆಂಪೇಗೌಡ ಪ್ರತಿಮೆ, ಚಾಮರಾಜನಗರದ ಮಹದೇಶ್ವರ ಬೆಟ್ಟ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮತ್ತು ಬೀದರ್ ಜಿಲ್ಲೆ ಬಸವಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆ ಶುರುವಾಗಲಿದೆ.

ಈ ಯಾತ್ರೆಯಲ್ಲಿ ರಾಜ್ಯ ಮತ್ತು ಕೇಂದ್ರದ ಹಿರಿಯ ನಾಯಕರ ನೇತೃತ್ವದಲ್ಲಿ ತಲಾ ನಾಲ್ಕು ತಂಡಗಳು 150 ಕ್ಕೂ ಹೆಚ್ಚು ರೋಡ್ ಶೋ 8,000 ಕಿಮೀ. ದೂರ ಕ್ರಮಿಸಲಿದೆ. ಮಾರ್ಚ್ 20 ರಂದು ಯಾತ್ರೆ ಅಂತ್ಯವಾಗಲಿದೆ. ಮಾರ್ಚ್ 25 ರಂದು ದಾವಣಗೆರೆಯಲ್ಲಿ ನಡೆಯಲಿರುವ ಮೆಗಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಜೊತೆಗೆ 10 ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದಾರೆ.

30 ಅಡಿ ಎತ್ತರ ಮತ್ತು 8 ಅಡಿ ಅಗಲದ ನಾಲ್ಕು ಬಸ್‌ಗಳನ್ನು ಯಾತ್ರೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಎಸಿ ಬಸ್‌ಗಳ ಮೇಲ್ಭಾಗದಲ್ಲಿ ನಾಯಕರು ನಿಂತು ಭಾಷಣ ಮಾಡುವ ಸ್ಥಳವೂ ಇರುತ್ತದೆ. ಮೊಬೈಲ್ ಚಾರ್ಜ್ ಮಾಡಲು ಸ್ಥಳ, ಹೋಮ್ ಥಿಯೇಟರ್, ಆಡಿಯೊ ಸಿಸ್ಟಮ್ಸ್, ಕ್ಯಾಮೆರಾಗಳು, ಎಲ್ಇಡಿ ಡಿಸ್ಪ್ಲೇ ಮತ್ತು ವೈಫೈ ಸೌಲಭ್ಯ ಮತ್ತು ಪವರ್ ಬ್ಯಾಕ್ ಆಪ್ ಆಗಿ ಜನರೇಟರ್ ಇರುತ್ತದೆ.

ಯಾತ್ರೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನೀರಾವರಿ ಸಚಿವ ಗೋವಿಂದ ಕಾರಜೋಳ ಮತ್ತು ಕಂದಾಯ ಸಚಿವ ಆರ್.ಅಶೋಕ ಚಾಮರಾಜನಗರ, ಬೆಳಗಾವಿ, ಬೀದರ್ ಮತ್ತು ಬೆಂಗಳೂರಿನಿಂದ ಪ್ರತಿ ತಂಡವನ್ನು ಮುನ್ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

 
Source: TV9KANNADA